ಪುತ್ತೂರು: ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿದ್ದ ಕರ್ನಾಟಕದ ಅಡಿಕೆ ಸಾಗಾಟ ಲಾರಿಗಳನ್ನು ಬಿಡುಗಡೆ ಮಾಡಲು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕ್ರಮ ಕೈಗೊಂಡಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ತಿಳಿಸಿದ್ದಾರೆ.
ಜಿಲ್ಲೆಯ ಬಹುಪಾಲು ಆರ್ಥಿಕತೆ ಅಡಕೆಯನ್ನು ಹೊಂದಿರುವ ಕಾರಣ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿತ್ತು. ರಾಜ್ಯದಿಂದ ಅಡಿಕೆ ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಮಹಾರಾಷ್ಟ್ರದಾದ್ಯಂತ ಪ್ರಯೋಗಾಲಯದ ತಪಾಸಣೆಗಾಗಿ ದಿನಗಟ್ಟಲೆ ತಡೆಹಿಡಿಯಲಾಗಿತ್ತು. ಇದರಿಂದಾಗಿ ಉತ್ತರ ಭಾರತದ ಮಾರುಕಟ್ಟೆಗಳಿಗೆ ತೆರಳಬೇಕಿದ್ದ ಅಡಿಕೆ ಬೆಳೆ ಹಾನಿಗೊಳಗಾಗಿ, ಬೆಳೆಗಾರರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿತ್ತು.
ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯದ ಬಿಜಿಪಿ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ನೇತೃತ್ವ ವಹಿಸಿದ್ದ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ ರಾಘವೇಂದ್ರ ಹಾಗೂ ಶಾಸಕರಾದ ರಾಜೇಶ್ ನಾಯ್ಕ್, ಆರಗ ಜ್ಞಾನೇಂದ್ರರ ಪ್ರಯತ್ನದ ಫಲ ಎಂಬಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳುವಂತಾಯಿತು. ಅಡಕೆ ಬೆಳೆಗಾರರ ಸಮಸ್ಯೆ ಇತ್ಯರ್ಥವಾಗಿದೆ. ಇಂದಿನಿಂದಲೇ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗುತ್ತಿದೆ. ಕೃಷಿಕ ಸಂತಸದಲ್ಲಿದ್ದಾನೆ. ರಾಜ್ಯ ಬಿಜೆಪಿ ನಾಯಕರ ಪ್ರಯತ್ನಕ್ಕೆ ಫಲ ಸಿಕ್ಕಿದೆ. ರೈತರ ಹಿತರಕ್ಷಣೆಗೆ ಧಾವಿಸಿ, ಈ ಗಂಭೀರ ಸಮಸ್ಯೆಯ ಕುರಿತು ತಕ್ಷಣವೇ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಚರ್ಚಿಸಿ ಅದಕ್ಕೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






















