ಮೂಡುಬಿದಿರೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ . ಅವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದನ್ನು ಆಡಿಯೋ ಮತ್ತು ವಿಡಿಯೋಗಳು ದೃಢಪಡಿಸುವುದರಿಂದ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಉತ್ತರ ಉಪವಿಭಾಗ (ಪಣಂಬೂರು)ದ ಎಸಿಪಿಗೆ ಸೂಚಿಸಿದ್ದರು.
ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಅವರು ನೀಡಿರುವ ತನಿಖಾ ವರದಿಯನ್ನು ಆಧರಿಸಿ ಇನ್ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ. ವಿರುದ್ಧ ತನ್ನ ಸಹೋದರಿ ಸುಮತಿ ನಾಯ್ಕ್ ಮಾಡಿದ ಆರೋಪಗಳೆಲ್ಲ ಸುಳ್ಳು ಎಂದು ಮೂಡುಬಿದಿರೆ ನಿವಾಸಿ ಪ್ರಫುಲ್ಲಾ ನಾಯ್ಕ್ ಎಂಬವರು ದೂರು ನೀಡಿದ್ದಾರೆ ಮತ್ತು ಮಾಧ್ಯಮ ಹೇಳಿಕೆಯನ್ನು ನೀಡಿರುವುದಾಗಿ ಎಸಿಪಿ ನೀಡಿರುವ ವರದಿಯಲ್ಲಿ ತಿಳಿಸಿದ್ದಾರೆ.
ಸುಮತಿ ಮತ್ತು ಪ್ರಫುಲ್ಲಾ ನಾಯ್ಕ್ ನಡುವೆ ಕೌಟುಂಬಿಕ ಕಲಹಗಳಿದ್ದು, ಸುಮತಿ ಮತ್ತು ಅವರ ಸಹೋದರಿಯ ವಿರುದ್ಧ ತಲಾ ಎರಡು ಪ್ರಕರಣಗಳು ದಾಖಲಾಗಿವೆ. ಇನ್ಸ್ಪೆಕ್ಟರ್ ವಿರುದ್ಧ ದಾಖಲಾದ ಪ್ರಕರಣವೂ ಸೇರಿದಂತೆ ತನಿಖೆಯಲ್ಲಿರುವ ಒಂದು ಪ್ರಕರಣವನ್ನು ಹೊರತುಪಡಿಸಿ, ಉಳಿದೆಲ್ಲವಕ್ಕೂ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ನ್ಯಾಯಾಲಯದಲ್ಲಿ ತೀರ್ಮಾನವಾಗಬೇಕಿದೆ.
ಇನ್ಸ್ಪೆಕ್ಟರ್ ವಿರುದ್ಧ ಮಾಧ್ಯಮ ಹೇಳಿಕೆ ನೀಡಿದ ಎರಡನೇ ಮಹಿಳೆ ಅವಿತಾ ಮಿನೇಜಸ್ ಇವರ ಪತಿಯ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ (ಒಂದರಲ್ಲಿ ಖುಲಾಸೆಗೊಂಡಿದ್ದಾರೆ). ಬಡ ವ್ಯಕ್ತಿಯೊಬ್ಬರ ಕಿಡ್ನಿಯ ಚಿಕಿತ್ಸೆಗಾಗಿ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ಇವರ ಮತ್ತು ಇವರ ಪತಿಯ ಮೇಲಿದೆ. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ನಂತರ ಇವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಇವರ ಮೇಲೆ ಯಾವುದೇ ಕಿರುಕುಳ ನಡೆದ ಬಗ್ಗೆ ಸಾಕ್ಷ್ಯಗಳಿಲ್ಲ. ಇನ್ಸ್ಪೆಕ್ಟರ್ ಲಂಚ ಕೇಳಿದ್ದಾರೆ ಮತ್ತು ದುರ್ವರ್ತನೆ ತೋರಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿ ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಸಾಕ್ಷ್ಯಾಧಾರ ಲಭಿಸಿಲ್ಲ. ಅಲ್ಲದೆ ಆ ಸಮಯದಲ್ಲಿ ಇಬ್ಬರು ಮಾಧ್ಯಮದವರು ಮತ್ತು ಒಬ್ಬ ವಕೀಲರು ಸ್ಥಳದಲ್ಲಿ ಉಪಸ್ಥಿತರಿದ್ದರು. ಅವರು ಅಂತಹ ಯಾವುದೇ ಲಂಚದ ಬೇಡಿಕೆ ಅಥವಾ ಕಿರುಕುಳ ನಡೆದಿರುವುದನ್ನು ನಿರಾಕರಿಸಿದ್ದಾರೆ.
ಲಭ್ಯವಿರುವ ವಿಡಿಯೋ ಮತ್ತು ಆಡಿಯೋದಲ್ಲಿ ಇನ್ಸ್ಪೆಕ್ಟರ್ ಅವರು ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿರುವುದು ಹಾಗೂ ಮಹಿಳೆಯೊಬ್ಬರ ಜೊತೆ ಪೋನ್ನಲ್ಲಿ ಅತ್ಯಂತ ಅಸಭ್ಯವಾಗಿ ಮಾತನಾಡಿರುವುದು ಕಂಡುಬಂದಿದೆ.
ಆಡಿಯೋ ಮತ್ತು ವಿಡಿಯೋದಲ್ಲಿರುವ ಇಬ್ಬರೂ ಮಹಿಳೆಯರು ದೂರು ನೀಡಲು ನಿರಾಕರಿಸಿದ್ದಾರೆ. ಅವರು ಬಯಸಿದಲ್ಲಿ ಮುಂದಿನ ದಿನಗಳಲ್ಲಿ ಹೇಳಿಕೆ ನೀಡಬಹುದು ಎಂದು ಅವರಿಗೆ ತಿಳಿಸಲಾಗಿದೆ ಎಂದು ಪೊಲೀಸ್ ಆಯಕ್ತರು ಸ್ಪಷ್ಟನೆ ನೀಡಿದ್ದಾರೆ.























