ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ನಲ್ಲಿ ಮನೆಯೊಂದರ ಎದುರು ನಿಲ್ಲಿಸಿದ್ದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹಾಗೂ ಕೇರಳದಲ್ಲಿ 40ಕ್ಕೂ ಅಧಿಕ ಕಳವು ಮತ್ತು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ‘ತೋಟ ಫೈಝಲ್’ (40) ಬಂಧಿತ ಆರೋಪಿ. ಆಗಸ್ಟ್ 18ರಂದು ಪೊಲೀಸರು ಈತನನ್ನು ಬಂಧಿಸಿದ್ದು, ಕಳವಾಗಿದ್ದ ಸ್ಕೂಟರ್ನ್ನು ವಶಪಡಿಸಿಕೊಂಡಿದ್ದಾರೆ.
ಜುಲೈ 24ರಂದು ಕೋಡಿಕಲ್ನ ಮನೆಯೊಂದರ ಎದುರು ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾಗಿತ್ತು. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಚಹರೆಯನ್ನು ಗುರುತಿಸಿದ್ದರು. ಬಳಿಕ ತನಿಖೆ ಮುಂದುವರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ‘ತೋಟ ಫೈಝಲ್’ ವಿರುದ್ಧ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 40ಕ್ಕೂ ಅಧಿಕ ಕಳವು ಮತ್ತು ಇತರ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರದ ಬಂದರು, ಕೊಣಾಜೆ, ಉಳ್ಳಾಲ, ಮೂಡುಬಿದಿರೆ, ಬಂಟ್ವಾಳ ಗ್ರಾಮಾಂತರ ಹಾಗೂ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ. ಅಲ್ಲದೆ, ನ್ಯಾಯಾಲಯದಿಂದ ಈತನ ವಿರುದ್ಧ ದಸ್ತಗಿರಿ ವಾರಂಟ್ ಕೂಡ ಹೊರಡಿಸಲಾಗಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

































