ಮಂಗಳೂರು:ನ್ಯಾಯಾಲಯದ ವಿಚಾರಣೆಗೆ ದೀರ್ಘಕಾಲದಿಂದ ಗೈರಾಗಿದ್ದ ಆರೋಪಿಯನ್ನು ವಿದೇಶದಿಂದ ಮರಳಿದ ತಕ್ಷಣವೇ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿರುವ ಘಟನೆ ನಡೆದಿದೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಇಬ್ರಾಹಿಂ ಬಾತೀಸ್ ಎಂದು ಗುರುತಿಸಲಾಗಿದೆ. ಫೆಬ್ರವರಿ 24ರಂದು ವಿದೇಶದಿಂದ ಮಂಗಳೂರಿಗೆ ಆಗಮಿಸಿದ ವೇಳೆ, ವಿಮಾನ ನಿಲ್ದಾಣದ ಇಮಿಗ್ರೇಶನ್ ಅಧಿಕಾರಿಗಳ ಸಹಯೋಗದೊಂದಿಗೆ ವಿಟ್ಲ ಠಾಣೆಯ ಹೆಡ್ ಕಾನ್ಸ್ಟೇಬಲ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ನಂತರ ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಮಾರ್ಚ್ 7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇಬ್ರಾಹಿಂ ಬಾತೀಸ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 193/2019ರಡಿ ಭಾರತೀಯ ದಂಡ ಸಂಹಿತೆಯ ಕಲಂ 427, 504, 394, 341 ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮತ್ತು ನಷ್ಟ ತಡೆ ಕಾಯ್ದೆ 2(A) ಅಡಿಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.






















