ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. (ಕಾ & ಸು) ಹಾಗೂ ಸಿಬ್ಬಂದಿಗಳಿಗೆ ರಸ್ತೆ ಬದಿಯಲ್ಲಿ ಜೋರಾಗಿ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಅಕ್ರಮ ಕೋಳಿ ಅಂಕ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ಕೆಲವರು ಪರಾರಿಯಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಡಬ ನಿವಾಸಿ ಸತೀಶ್ (38), ಬಂಟ್ವಾಳ ನಿವಾಸಿ ಮುರಳಿ (30) ಹಾಗೂ ಪುತ್ತೂರು ನಿವಾಸಿ ಮೋನಪ್ಪ ಕೆ. (36) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ದೇರಣ್ಣ ಮತ್ತು ಉಮೇಶ್ ಎಂಬವರು ಕೋಳಿ ಅಂಕ ಆಯೋಜನೆ ಮಾಡುತ್ತಿರುವುದು ತಿಳಿದುಬಂದಿದೆ.
ದಾಳಿ ವೇಳೆ ಐದು ಹುಂಜ ಕೋಳಿಗಳು, ಎರಡು ಬಾಲುಗಳು (ಕೋಳಿಗಳ ಕಾಲಿಗೆ ಕಟ್ಟುವ ಸಣ್ಣ ಕತ್ತಿಗಳು), ಪಣವಾಗಿ ಇಟ್ಟಿದ್ದ ರೂ. 2,300 ನಗದು,ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆ ಯಲ್ಲಿ ಅ.ಕ್ರ. 32/2026ರಡಿ ಪ್ರಾಣಿ ಹಿಂಸೆ ನಿಷೇಧ ಕಾಯ್ದೆ ಕಲಂ 11(1)(m)(ii), 11(1)(n) ಹಾಗೂ ಸಂಬಂಧಿತ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.





















