ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಇಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಚಿನ್ ಕೆ ಆರ್ (24 ವ) ಹತ್ಯಡ್ಕ ಗ್ರಾಮ, ಅರಸಿನಮಕ್ಕಿ , ಕೊಕ್ಕಡ ಹಾಗೂ ಚಂದನ್ (24 ವ) ಮಣ್ಣಗುಂಡಿ ಹೌಸ್, ನೆಲ್ಯಾಡಿ ಬಂಧಿತರು.
ಮೇ 24ರಂದು ಮುಂಜಾನೆ 2.10ಕ್ಕೆ ಕೋಡಿಕಲ್ ನಲ್ಲಿ ಘಟನೆ ನಡೆದಿದ್ದು, ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್ ನಲ್ಲಿ ಬಂದ ಇಬ್ಬರು ಯುವಕರಲ್ಲಿ, ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್ ನ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದ ಪರಿಣಾಮವಾಗಿ ಪೊಲೀಸ್ ಸಿಬ್ಬಂದಿಯ ತಲೆಗೆ ಗಾಯ ಉಂಟಾಗಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿರುವ ಬಗ್ಗೆ, ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಬೇಧೀಸಿರುವ ಪೊಲೀಸರು ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಿಂದ ಮೇ 26ರಂದು ಸಿಸಿಬಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕ್ ನ್ನು ಅಮಾನತ್ತು ಮಾಡಿದ್ದು, ತನಿಖೆ ಮುಂದುವರೆದಿದೆ.
ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿಗಳ ಪೈಕಿ ಸಚಿನ್ ಕೆ.ಆರ್ ಎಂಬಾತನು ಕುಂಟಿಕಾನದ PON PON Sweets ಪ್ಯಾಕ್ಟರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮತ್ತೊಬ್ಬ ಆರೋಪಿ ಚಂದನ್ ಕೂಳೂರಿನ ಅದ್ವೈತ್ ಕಿಯಾ ಶೋ ರೂಮ್ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಮದ್ಯರಾತ್ರಿ 2 ಗಂಟೆ ವೇಳೆಗೆ ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳನ್ನು ಬೀಟ್ ಪೊಲೀಸರು ತಡೆದು ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡು ಪೊಲೀಸರ ಮೇಲೆ ಸಿಮೆಂಟ್ ಸೀಟಿನ ತುಂಡಿನಿಂದ ಹಲ್ಲೆ ನಡೆಸಿರುವುದು ತನಿಖೆಯಿಂದ ತಿಳಿದು ಬಂದಿದೆ.






















