ಬಂಟ್ವಾಳ: ಕಾಲೇಜಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿ ಸಮೀಪದ ಮೋಂತಿಮಾರು ಪಡ್ಪು ಎಂಬಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಆರೋಪಿ ಎಂದು ತಿಳಿದುಬಂದಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.
ವಿದ್ಯಾರ್ಥಿನಿ ಬಸ್ಸಿಗಾಗಿ ಬಸ್ ತಂಗುದಾಣದಲ್ಲಿ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇತರ ಪ್ರಯಾಣಿಕರು ಜೋರಾಗಿ ಕಿರುಚಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.
ಈ ಮಧ್ಯೆ ಆರೋಪಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.






















