ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಗಡಿಯಾರದಲ್ಲಿ ನಡೆದಿದ್ದು, ಚಾಲಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಚಾಲಕನನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ರಂಜಿತ್, ದರ್ಶನ್, ಶೋಭಾ ಗಾಯಾಳುಗಳು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸ್ಥಳೀಯರು ಕಾರಿನೊಳಗಿದ್ದ ನಾಲ್ವರು ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರು ಚಾಲಕ ಲಕ್ಷ್ಮೀಕಾಂತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.






















