ಸುಳ್ಯ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲಿಮಲೆಯ ಯುವಕ ಕಿಶನ್ ಮಾವಿನಕಟ್ಟೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಎಲಿಮಲೆ ನಿವಾಸಿ ಕಿಶನ್ ಹಾಗೂ ಹರ್ಷಿತ್ ಪ್ರಯಾಣಿಸುತ್ತಿದ್ದ ಕಾರು ಗುಂಡ್ಯ ಸಮೀಪ ಲಾರಿಯೊಂದಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿತ್ತು.
ಕಳೆದ ಎರಡು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಕಿಶನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಯುವಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಎಲಿಮಲೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಕಿಶನ್ ಅವರ ಅಕಾಲಿಕ ನಿಧನಕ್ಕೆ ಸ್ನೇಹಿತರು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.


































