ಹಿರಿಯ ಕಲಾವಿದ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದ ಬೆನ್ನಲ್ಲೇ ರಾಜು ತಾಳಿಕೋಟೆಯವರನ್ನು ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಕಲಿಯುಗದ ಕುಡುಕ ನಾಟಕ ಖ್ಯಾತಿಯ ರಾಜು ತಾಳಿಕೋಟೆ, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಿಗಿ ಗ್ರಾಮದವರು. ಸುಮಾರು 300 ಕ್ಕೂ ನಾಟಕಗಳು ಹಾಗೂ 20 ಕ್ಕೂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಾಟಕ ಹಾಗೂ ಸಿನಿಮಾ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇಂದು ಹಠಾತ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.