ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬರು ಕಳೆದ 27 ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಬಳಿಕ ಚಿಕಿತ್ಸೆ ಫಲಿಸದೆ ಶನಿವಾರ (ಜು.18) ಸಂಜೆ ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕದಲ್ಲಿ ನಡೆದಿದೆ.
ಮೃತರನ್ನು ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ನಿವಾಸಿ ದಿ. ಹೆಗ್ಗಡೇಶ ಗೌಡ ಅವರ ಪುತ್ರಿ ಪ್ರಜ್ಞಾ (26) ಎಂದು ಗುರುತಿಸಲಾಗಿದೆ.
ಪ್ರಜ್ಞಾ ಅವರು ಆರೋಗ್ಯ ಇಲಾಖೆಯಲ್ಲಿ ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯಾಧಿಕಾರಿ (Community Health Officer) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೂನ್ 21ರಂದು ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 27 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜೀವನ್ಮರಣ ಹೋರಾಟ ನಡೆಸಿ, ಚಿಕಿತ್ಸೆ ಫಲಕಾರಿಯಾಗದೆ ಜು.18ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ ಬೇಬಿ, ಸಹೋದರಿ ದೀಕ್ಷಾ ಅವರನ್ನು ಅಗಲಿದ್ದಾರೆ.






















