ಬೆಳ್ತಂಗಡಿ: ಕಟ್ಟಡ ತೆರವುಗೊಳಿಸುವ ಕಾಮಗಾರಿ ವೇಳೆ ಸಿಮೆಂಟ್ನ ಅವಶೇಷ ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ಕಡಬ ತಾಲೂಕಿನ ಯುವ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ನಗರದ ಮೂರು ಮಾರ್ಗದ ಸಮೀಪ ಮಹಿಳಾ ಗ್ರಾಹಕರ ಸಹಕಾರಿ ಸಂಘಕ್ಕೆ ಸೇರಿದ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿ ನಡೆಯುತ್ತಿತ್ತು. ಕಟ್ಟಡದ ಮೇಲ್ಭಾಗದಲ್ಲಿ ರಾಡ್ಗಳ ಸಹಿತ ಸಿಮೆಂಟ್ ಭಾಗವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಸಿಮೆಂಟ್ನ ದೊಡ್ಡ ತುಂಡು ಏಕಾಏಕಿ ಬಿದ್ದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಝುಬೈರ್ (22) ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ನೀಡುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.























