ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕರಾವಳಿ ಉತ್ಸವ ಮೈದಾನ, ಕದ್ರಿ ಪಾರ್ಕ್ ಮತ್ತು ನಗರದ ಕಡಲತೀರಗಳಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಅವರು ಹೇಳಿದರು.
ಡಿ.20ರಂದು ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ನ ಶಾಸಕರು, ವಿವಿಧ ಅಕಾಡಮಿ, ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ವಿವರಿಸಿದರು.
























