ಪುತ್ತೂರು: ಜನವರಿ 26 ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸುವಂತಾಗಬೇಕು. ಆದರೆ ಅದೇ ದಿನ ಧ್ವಜಗಳು ರಸ್ತೆ ಹಾಗೂ ಚರಂಡಿಯಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಈ ಹಿಂದೆ ಕಂಡಿದ್ದೇವೆ. ಆದ್ದರಿಂದ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನವನ್ನು ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ಮತ್ತು ಇತರ ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ದ.ಕ. ಜಿಲ್ಲಾಧಿಕಾರಿ ಹಾಗೂ ಶಿಕ್ಷಣಾಧಿಕಾರಿಗೆ ಮನವಿ ನೀಡಿ, ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ನಿಲ್ಲಿಸುವಂತೆ ಮುಂಬೈ ಹೈಕೋರ್ಟ್ ಈಗಾಗಲೇ ಸರ್ಕಾರಕ್ಕೆ ಆದೇಶ ನೀಡಿದೆ. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಗೃಹ ಹಾಗೂ ಶಿಕ್ಷಣ ಇಲಾಖೆಗಳು ಈಗಾಗಲೇ ಸುತ್ತೋಲೆಗಳನ್ನು ಹೊರಡಿಸಿವೆ. ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡುವುದು ‘ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆ) ಕಾಯಿದೆ 1950’ ಮತ್ತು ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ 1971’ ರ ಅಡಿಯಲ್ಲಿ ಕಾನೂನುಬದ್ಧ ಅಪರಾಧವಾಗಿದೆ.
ಹಿಂದೂ ಜನಜಾಗೃತಿ ಸಮಿತಿಯು ಕಳೆದ ಅನೇಕ ವರ್ಷಗಳಿಂದ ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸ, ಕರಪತ್ರ ವಿತರಣೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ರಾಷ್ಟ್ರಧ್ವಜದ ಗೌರವ ಕಾಪಾಡುವ ಕುರಿತು ನಿರಂತರ ಜನಜಾಗೃತಿ ಮೂಡಿಸುತ್ತಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದನ್ನು ತಡೆಯಲು ‘ರಾಷ್ಟ್ರ ಧ್ವಜ ಗೌರವ ಕೃತಿ ಸಮಿತಿ’ಯನ್ನು ಕೂಡಲೇ ಸ್ಥಾಪಿಸಬೇಕು, ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಎಲ್ಲಾ ಶಾಲೆಗಳಲ್ಲಿ ‘ರಾಷ್ಟ್ರಧ್ವಜವನ್ನು ಗೌರವಿಸಿ’ ಎಂಬ ಉಪಕ್ರಮವನ್ನು ನಡೆಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದೆ.
ಹಿಂದೂ ಜನಜಾಗೃತಿ ಸಮಿತಿಯ ಉಪೇಂದ್ರ ಆಚಾರ್ಯ, ಸುಧಾಕರ್, ನ್ಯಾಯವಾದಿ ತೀರ್ಥೇಶ್ ಬಲ್ಯ, ಹಿಂದೂ ಸೇವಾ ಸಮಿತಿಯ ಯೋಗೀಶ್ ರೈ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ದಿನಕರ್ ಪೂಜಾರಿ, ಪ್ರಮುಖರಾದ ಚಂದ್ರಕಾಂತ್ ಕಾಮತ್, ಹರೀಶ್, ರಾಜೇಂದ್ರ ಪೇಜಾವರ, ಲಕ್ಷ್ಮೀಕಾಂತ್ ಹಾಗೂ ಭಾಸ್ಕರ್ ಆಚಾರ್ಯ ಉಪಸ್ಥಿತರಿದ್ದರು.





















