ಕರಾವಳಿ: ಕರಾವಳಿ ಕರ್ನಾಟಕದ ಮೀನುಗಾರರು ಅಂತರಾಜ್ಯ ಮೀನುಗಾರಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿ ಚರ್ಚಿಸಿದರು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಸಂದರ್ಭದಲ್ಲಿ ವ್ಯಾಪ್ತಿ ಮೀರಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಹೆಚ್ಚಿನ ದಂಡ ವಿಧಿಸಲಾಗುತ್ತಿರುವ ಕುರಿತು ಶಾಸಕ ಸುವರ್ಣ ಸಚಿವರ ಗಮನಕ್ಕೆ ತಂದರು. ಈ ಸಮಸ್ಯೆಯಿಂದ ಕರಾವಳಿ ಮೀನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಮನವಿ ಮಾಡಿದರು.
ಅಂತರಾಜ್ಯ ಮಟ್ಟದಲ್ಲಿ ಸಮನ್ವಯತೆ ಸಾಧಿಸಲು ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ತರಬೇಕು ಹಾಗೂ ಎಲ್ಲಾ ರಾಜ್ಯಗಳ ಸಚಿವರು ಮತ್ತು ಮೀನುಗಾರ ಮುಖಂಡರನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಬೇಕೆಂದು ಅವರು ಸಲಹೆ ನೀಡಿದರು.
ಮಲ್ಪೆ ಮೀನುಗಾರಿಕಾ ಬಂದರಿಗೆ ಅಧಿಕಾರಿಗಳ ನಿಯೋಗದೊಂದಿಗೆ ಭೇಟಿ ನೀಡುವಂತೆ ಕೂಡ ಆಹ್ವಾನಿಸಲಾಯಿತು. ಮನವಿಗೆ ಸ್ಪಂದಿಸಿದ ಸಚಿವ ನಿತೇಶ್ ರಾಣೆ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.




















