ಮಂಗಳೂರು: ನಗರದ ಕದ್ರಿ ಮತ್ತು ಶಕ್ತಿನಗರ ಪ್ರದೇಶಗಳಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸಿರುವ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಸಮಗ್ರ ಮಾಹಿತಿ ಪಡೆದರು.ಕದ್ರಿ ಕೈಬಟ್ಟಲ್ ಹಾಗೂ ಶಕ್ತಿನಗರದ ಕೋರ್ಡೆಲ್ ಭಾಗಗಳಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ಬೋನುಗಳನ್ನು ಅಳವಡಿಸಿದ್ದು, ವಿಶೇಷ ತಂಡವನ್ನು ನಿಯೋಜಿಸಿ ಹಗಲು-ರಾತ್ರಿ ಗಸ್ತು ತಿರುಗಲು ಕ್ರಮ ಕೈಗೊಂಡಿದೆ.
ಈ ಎರಡು ಪ್ರದೇಶಗಳಲ್ಲಿ ಕಾಣಿಸಿಕೊಂಡ ಪ್ರಾಣಿ ಒಂದೇ ಚಿರತೆ ಆಗಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಅದು ಕಾಡು ಪ್ರದೇಶದತ್ತ ಮರಳಿರಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಆದಾಗ್ಯೂ, ಯಾವುದೇ ಅನಾಹುತ ಸಂಭವಿಸದಂತೆ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ.ಅರಣ್ಯ ಇಲಾಖೆ ವಲಯಾಧಿಕಾರಿ ರಾಜೇಶ್ ಬಾಳಿಗಾರ್ ಸಾರ್ವಜನಿಕರಿಗೆ ಮನವಿ ಮಾಡಿದ್ದು, ಚಿರತೆ ಅಥವಾ ಇತರ ಕಾಡುಪ್ರಾಣಿಗಳು ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ 1926ಕ್ಕೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಕಾಡುಪ್ರಾಣಿಗಳು ಆಹಾರ ಅರಸಿ ವಾಸಸ್ಥಳಗಳತ್ತ ಬರುವ ಘಟನೆಗಳು ಸೂಕ್ಷ್ಮವಾಗಿದ್ದು, ಸಾರ್ವಜನಿಕರ ಸುರಕ್ಷತೆಯೇ ಪ್ರಥಮ ಆದ್ಯತೆ. ಅಧಿಕಾರಿಗಳು ಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ.ಸ್ಥಳೀಯರು ಅನಗತ್ಯ ಆತಂಕಕ್ಕೊಳಗಾಗದೆ, ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.






















