ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಧ್ಯಾಹ್ನ ಸುಮಾರು 1:40ರ ವೇಳೆಗೆ ವಿಜಯ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹಾಗೂ ಜಯಘೋಷಗಳ ಮೂಲಕ ತಮ್ಮ ನೆಚ್ಚಿನ ನಟನಿಗೆ ಅದ್ದೂರಿ ಸ್ವಾಗತ ಕೋರಿದರು.
ಸಚಿವ ಯು.ಟಿ. ಖಾದರ್ ಅವರು ವಿಮಾನ ನಿಲ್ದಾಣದಲ್ಲಿ ಖುದ್ದು ಹಾಜರಿದ್ದು ಸಿಎಂ ವಿಜಯ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಕೆಲವು ನಿಮಿಷಗಳ ಕಾಲ ಉಭಯ ಕುಶಲೋಪರಿ ಮಾತುಕತೆ ನಡೆಸಿದರು.
ಅಭಿಮಾನಿಗಳ ಪ್ರೀತಿಗೆ ಪ್ರತಿಕ್ರಿಯಿಸಿದ ವಿಜಯ್, ಕೈಬೀಸಿ ನಗುಮುಖದೊಂದಿಗೆ ಅಭಿವಂದನೆ ಸಲ್ಲಿಸಿದರು. ಬಳಿಕ ಅವರು ಉಡುಪಿ ಜಿಲ್ಲೆಯತ್ತ ಪ್ರಯಾಣ ಬೆಳೆಸಿದರು. ವಿಜಯ್ ಅವರ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿತ್ತು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್ ಅವರ ಭೇಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಅವರ ದರ್ಶನಕ್ಕಾಗಿ ಹಲವು ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದರು.






















