ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ವಿಬಿಜೆ ರಾಮ್ಜಿ’ ಯೋಜನೆಯ ಲೋಕಾರ್ಪಣೆ ಶೀಘ್ರದಲ್ಲೇ ನಡೆಯಲಿದ್ದು, ಈ ಯೋಜನೆಗಾಗಿ ಲೋಗೋ ವಿನ್ಯಾಸಗೊಳಿಸಲು ದೇಶವ್ಯಾಪಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸುಮಾರು 7,000ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಪುತ್ತೂರಿನ ಯುವ ಚಿತ್ರಕಲಾವಿದ ರಾಂಪ್ರಸಾದ್ ಅವರು ವಿನ್ಯಾಸಗೊಳಿಸಿದ ಲೋಗೋ ಪ್ರಥಮ ಸ್ಥಾನ ಪಡೆದು ಅಧಿಕೃತವಾಗಿ ಆಯ್ಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಗುರುವಾರ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ನೇತೃತ್ವದಲ್ಲಿ ಬಿಜೆಪಿ ಪುತ್ತೂರು ನಗರ ಮಂಡಲದ ವತಿಯಿಂದ ರಾಂಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಗೌರವಿಸಲಾಯಿತು.
ರಾಂಪ್ರಸಾದ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಸಕ್ರಿಯ ಕಾರ್ಯಕರ್ತರಾಗಿರುವ ಪುತ್ತೂರಿನ ಶ್ರೀರಾಮ್ ಜುವೆಲ್ಲರ್ಸ್ನ ಮಾಲಕ ಮಲ್ಲೇಶ್ ಆಚಾರ್ಯ ಅವರ ಸುಪುತ್ರ. ಈಗಾಗಲೇ ಚಿತ್ರಕಲಾ ಕ್ಷೇತ್ರದಲ್ಲಿ ವಿಶೇಷ ತರಬೇತಿ ಪಡೆದು ರಾಜ್ಯ ಹಾಗೂ ರಾಷ್ಟ್ರಮಟ್ಟದ ಅನೇಕ ಸ್ಪರ್ಧೆಗಳಲ್ಲಿ ಪ್ರಶಸ್ತಿ ಹಾಗೂ ಮಾನ್ಯತೆಗಳನ್ನು ಗಳಿಸಿರುವ ಅವರು, ತಮ್ಮ ಪ್ರತಿಭೆಯ ಮೂಲಕ ಪುತ್ತೂರಿಗೆ ಹೆಮ್ಮೆ ತಂದಿದ್ದಾರೆ.
ಅವರ ಈ ಸಾಧನೆಗೆ ಸಾರ್ವಜನಿಕ ವಲಯದಿಂದ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಪುತ್ತೂರು ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾಗೌರಿ, ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ ಹಾಗೂ ಶಶಿಧರ ನಾಯಕ್, ಪಕ್ಷದ ಹಿರಿಯ ಮುಖಂಡರಾದ ಚಂದ್ರಶೇಖರ ರಾವ್ ಬಪ್ಪಳಿಗೆ, ನಗರ ಮಂಡಲ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಮತ್ತು ರೈ ಕೈಕಾರ, ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ನಾಗೇಶ್ ಟಿ.ಎಸ್. ಕೆಮ್ಮಾಯಿ ಹಾಗೂ ವಿರೂಪಾಕ್ಷ ಭಟ್ ಮಚ್ಚಿಮಲೆ , ನಗರ ಮಂಡಲದ ಪ್ರಮುಖರಾದ ನಾಗೇಂದ್ರ ಬಾಳಿಗ, ನಿರಂಜನ್ ಮಾನ್ಯ, ಸತೀಶ್ ನಾಯಕ್, ಮನೋಹರ್ ಕಲ್ಲಾರೆ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.





















