ಕರಾವಳಿ

ತೀರಕ್ಕೆ ಬಂತು ಸಮುದ್ರದಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿ!

ಈ ಸುದ್ದಿಯನ್ನು ಶೇರ್ ಮಾಡಿ

ಸಮುದ್ರದಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೀಡಾಗಿದ್ದ ಮಲ್ಪೆ ನೋಂದಣಿಯ ‘ಮಂಜು ಮಾತಾ’ ಎಂಬ ಗಿಲ್‌ನೆಟ್ ಮೀನುಗಾರಿಕಾ ದೋಣಿ, ಶುಕ್ರವಾರ ಸಂಜೆ ಉಚ್ಚಿಲ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ.

maithri

ಈ ದೋಣಿಯು ಜೂನ್ 29 ರಂದು ಬೆಳಿಗ್ಗೆ ಮಲ್ಪೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿತ್ತು. ಅದೇ ದಿನ ಮಧ್ಯಾಹ್ನ ದೋಣಿಯ ತಳಭಾಗದಲ್ಲಿ ಸೋರಿಕೆ ಕಂಡುಬಂದು ನೀರು ಒಳಗೆ ನುಗ್ಗತೊಡಗಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ, ಮೀನುಗಾರರು ಭಾರತೀಯ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆಯ ಸಿಬ್ಬಂದಿ, ದೋಣಿಯಲ್ಲಿದ್ದ ಆರೂ ಜನ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದರು. ಆದರೆ, ದೋಣಿಯನ್ನು ಮೇಲೆತ್ತಲು ಸಾಧ್ಯವಾಗದ ಕಾರಣ, ರಕ್ಷಣಾ ಕಾರ್ಯಾಚರಣೆಯ ನಂತರ ಅದನ್ನು ಸಮುದ್ರದಲ್ಲಿಯೇ ಬಿಡಲಾಗಿತ್ತು.

ನಂತರ, ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಕರಾವಳಿ ಭದ್ರತಾ ಪೊಲೀಸ್ ಠಾಣೆ, ಮೀನುಗಾರಿಕಾ ಇಲಾಖೆ, ವಲಸೆ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಮೀನುಗಾರರನ್ನು ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲಿಸಿದರು. ಈ ಪೈಕಿ ನಾಲ್ವರು ತಮಿಳುನಾಡು ಮೂಲದವರು ಮತ್ತು ಇಬ್ಬರು ಕೇರಳದವರು ಎಂದು ದೃಢಪಟ್ಟಿದೆ.

ಜಿಲ್ಲಾಡಳಿತವು ವಿಧಿಸಿದ್ದ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಈ ದೋಣಿ ಮೀನುಗಾರಿಕೆಯಲ್ಲಿ ತೊಡಗಿತ್ತು ಎಂದು ಆರೋಪಿಸಲಾಗಿದೆ. ಹೀಗಾಗಿ, ದೋಣಿ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ದೋಣಿಯ ಪರವಾನಗಿ ಮತ್ತು ನೋಂದಣಿಯನ್ನು ರದ್ದುಗೊಳಿಸುವಂತೆ ಮೀನುಗಾರಿಕಾ ಇಲಾಖೆಗೆ ವರದಿ ಸಲ್ಲಿಸಲಾಗಿದೆ.

ಶುಕ್ರವಾರ ಸಂಜೆ ಸುಮಾರು 6:15 ರ ಸುಮಾರಿಗೆ ಈ ದೋಣಿ ಉಚ್ಚಿಲ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿತು. ಮಾಹಿತಿ ತಿಳಿದ ತಕ್ಷಣ ಹೆಜಮಾಡಿ ಕರಾವಳಿ ಭದ್ರತಾ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ರಜಾಕ್, ಸಿಬ್ಬಂದಿಗಳಾದ ಪ್ರವೀಣ್, ಕೆ.ಎನ್.ಡಿ ರಾಜೇಶ್ ಮತ್ತು ತೀರ್ಥ ಅವರು ಸ್ಥಳೀಯ ಮೀನುಗಾರರು ಮತ್ತು ಸಾರ್ವಜನಿಕರ ಸಹಾಯದಿಂದ ದೋಣಿಯನ್ನು ಸುರಕ್ಷಿತವಾಗಿ ದಡಕ್ಕೆ ಎಳೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts