ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಬೇಕಲ ಸಮೀಪದ ಪಳ್ಳಿಕ್ಕರ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ (24) ಮೃತ ಯುವಕ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಗೊಂದಲದಿಂದ ನೊಂದಿದ್ದ ಅರ್ಜುನ್ ಅವರ ತಂಗಿ ಸುಮಾರು ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು ಎನ್ನಲಾಗಿದೆ. ಈ ಘಟನೆಯ ಬಳಿಕ ಅರ್ಜುನ್ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ದುಬೈನಲ್ಲಿ ಆಟೊಮೊಬೈಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಅರ್ಜುನ್, ಆ.9ರಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ತಾವು ಮಂಗಳೂರಿಗೆ ಬಂದಿರುವ ವಿಚಾರವನ್ನು ಮನೆಯವರಿಗೆ ತಿಳಿಸಿರಲಿಲ್ಲ ಎನ್ನಲಾಗಿದೆ.
ಮಂಗಳೂರಿಗೆ ಬಂದ ಬಳಿಕ ಸ್ನೇಹಿತರಿಗೆ ತಾವು ಲಾಡ್ಜ್ನಲ್ಲಿ ತಂಗಿರುವುದಾಗಿ ಸಂದೇಶ ಕಳುಹಿಸಿದ್ದರು. ಬಳಿಕ ಮಧ್ಯಾಹ್ನ ತಾಯಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ನಂತರ ಅವರ ಮೊಬೈಲ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಆತಂಕಗೊಂಡ ಸ್ನೇಹಿತರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
ಕುಟುಂಬಸ್ಥರು ಪೊಲೀಸರ ನೆರವಿನಿಂದ ಅರ್ಜುನ್ಗಾಗಿ ಹುಡುಕಾಟ ನಡೆಸಿದ್ದು, ಮೊಬೈಲ್ನ ಸ್ಥಳ ಮಾಹಿತಿ ಕಾವೂರು ಪ್ರದೇಶದಲ್ಲಿ ಪತ್ತೆಯಾಗಿತ್ತು ಎಂದು ತಿಳಿದುಬಂದಿದೆ.
ಕೇವಲ ಎರಡು ತಿಂಗಳ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬದಲ್ಲಿ ಇದೀಗ ದುಃಖ ಮಡುಗಟ್ಟಿದೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






















