ಪುತ್ತೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಇದರಿಂದ ದೇಹಕ್ಕೆ ಬೇಕಾದ ವ್ಯಾಯಾಮ ಸರಿಯಾಗಿ ದೊರಕುತ್ತಿಲ್ಲ. ದೇಹ ಸದೃಢವಾಗಬೇಕಾದರೆ ದೈಹಿಕ ಚಟುವಟಿಕೆಗಳು ತುಂಬಾ ಮುಖ್ಯ ಎಂದು ಪಾಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್ ರೈ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಾರ್ಷಿಕ ಕ್ರೀಡಾದಿನವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಶನಿವಾರ ಮಾತನಾಡಿದರು.
ಪ್ರತಿದಿನ ನಡೆಯುವುದನ್ನು ರೂಢಿಸಿಕೊಳ್ಳಬೇಕು. ನಡಿಗೆಯಿಂದ ನಮ್ಮ ಆರೋಗ್ಯವು ವೃದ್ಧಿಸುತ್ತದೆ. ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗಳನ್ನು ಅಳವಡಿಸಿಕೊಂಡು ದೈಹಿಕವಾದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅಂತೆಯೇ ಶಾಲೆಗಳಲ್ಲಿ ಪಠ್ಯದ ಜೊತೆಗೆ ದೈಹಿಕ ಶಿಕ್ಷಣಕ್ಕೂ ಹೆಚ್ಚು ಒತ್ತನ್ನು ನೀಡಬೇಕು ಎಂದು ನುಡಿದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಕ್ರೀಡಾ ಮನೋಭಾವವನ್ನು ಉದ್ದೀಪನಗೊಳಿಸಿಕೊಂಡು ಆತ್ಮವಿಶ್ವಾಸದೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದರು.
ಕ್ರೀಡಾಕೂಟಕ್ಕೆ ಮೊದಲು ವಿದ್ಯಾಥಿಗಳಿಂದ ಪಥಸಂಚಲನ ನಡೆಯಿತು. ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅನುಶ್ರೀ ಪ್ರಾರ್ಥಿಸಿ, ಸಾನ್ವಿ. ಜಿ ಸ್ವಾಗತಿಸಿದರು. ವಿದ್ಯಾರ್ಥಿನಿ ಸಾನ್ವಿ ವಿ.ಎಸ್. ವಂದಸಿದರು. ಶಿಕ್ಷಕಿಯರಾದ ಗೌರಿ ಅತಿಥಿ ಪರಿಚಯ ನಡೆಸಿಕೊಟ್ಟು, ದೀಪ್ತಿ ಕಾರ್ಯಕ್ರಮ ನಿರ್ವಹಿಸಿದರು.
























