ಪುತ್ತೂರು: ನೆಹರೂನಗರ ವಿವೇಕಾನಂದ ಕಾಲೇಜು ಆವರಣದಲ್ಲಿ ಜ. 12ರಂದು ವಿವೇಕಾನಂದ ಜಯಂತಿ ಆಚರಣೆ ನಡೆಯಲಿದೆ. ಬೆಳಿಗ್ಗೆ 9.30ರಿಂದ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ “ಯುವಜನತೆ ಮತ್ತು ದೇಶಭಕ್ತಿ” ಎನ್ನುವ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ, ವಂದೇ ಮಾತರಂ ಹಾಗೂ ದೇಶಭಕ್ತಿಗೀತೆಗಳ ಸಮೂಹಗಾಯನ ಜರಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣಭಟ್ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖ್ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಸ್ಮರಣೀಯಗೊಳಿಸುವಲ್ಲಿ ಈ ಬಾರಿ ವಿಶೇಷ ಆಕರ್ಷಣೆಯಾಗಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ನೇ ವರ್ಷಾಚರಣೆಯ ಸಲುವಾಗಿ ನೆಹರೂ ನಗರದ ಕಾಲೇಜು ಆವರಣದಲ್ಲಿ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳು ಹಾಗೂ ಗ್ರಾಮಾಂತರ ಶಾಲೆಗಳ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳು ಸೇರಿ ಒಟ್ಟು ಇಪತ್ತು ಸಾವಿರ ವಿದ್ಯಾರ್ಥಿಗಳು ಏಕ ಕಾಲದಲ್ಲಿ ವಂದೇ ಮಾತರಂ ಮತ್ತು ದೇಶ ಭಕ್ತಿಗೀತೆಗಳ ಸಮೂಹ ಗಾಯನದಲ್ಲಿ ಭಾಗವಹಿಸಲಿದ್ದಾರೆ ಎಂದ ಅವರು ವಿವೇಕಾನಂದ ಕ್ಯಾಂಪಸ್ಸಿನಲ್ಲಿ ನಡೆಯಲಿರುವ ಈ ವಿವೇಕಾನಂದ ಜಯಂತಿ ಕಾಠ್ಯಕ್ರಮದಲ್ಲಿ ವಿವೇಕಾನಂದ ಪದವಿ ಕಾಲೇಜು, ವಿವೇಕಾನಂದ ಪದವಿ ಪೂರ್ವಕಾಲೇಜು, ವಿವೇಕಾನಂದ ಸ್ನಾತಕೋತ್ತರ ಕೇಂದ್ರ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ವಿವೇಕಾನಂದ ಪಾಲಿಟೆಕ್ನಿಕ್, ವಿವೇಕಾನಂದ ಸಿಬಿಎಸ್ಇ ಹಾಗೂ ವಿವೇಕಾನಂದ ಶಿಶುಮಂದಿರ, ಬಿಎಡ್ ಕಾಲೇಜು, ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜು, ವಿವೇಕಾನಂದ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಲಿರುವರು ಎಂದು ಅವರು ಹೇಳಿದರು.
ಸಾಂಸ್ಕೃತಿಕ ಕಾಠ್ಯಕ್ರಮ:
ಸಭಾ ಕಾಠ್ಯಕ್ರಮದ ನಂತರ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿಯ ಕುರಿತು ಸಂಘ ಶತಾಬ್ದಿ” ಎನ್ನುವ ಪರಿಕಲ್ಪನೆಯಡಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಡಾ. ಕೃಷ್ಣ ಭಟ್ ಹೇಳಿದರು.
ಶತ ಜಯಘೋಷ್ ಪಥ ಸಂಚಲನ:
ಈ ಬಾರಿ ವಿಶೇಷವಾಗಿ ವಿವೇಕಾನಂದ ಜಯಂತಿಯ ಅಂಗವಾಗಿ ಜ.13ರಂದು ಬೆಳಗ್ಗೆ 10 ಗಂಟೆಗೆ “ಶತ ಜಯಘೋಷ್” ಎನ್ನುವ ಪರಿಕಲ್ಪನೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿದ್ಯಾಸಂಸ್ಥೆಗಳ ಸುಮಾರು 1500 ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ಘೋಷ್ ವಾದನದೊಂದಿಗೆ ಸಂಚಲನ ನಡೆಯಲಿದೆ. ಪಥ ಸಂಚಲನವು ಕಲ್ಲಾರೆ ಹಾಗೂ ಬೊಳ್ವಾರಿನಿಂದ ಏಕಕಾಲದಲ್ಲಿ ಆರಂಭಗೊಂಡು ಪುತ್ತೂರಿನ ರಾಜಬೀದಿಗಳಲ್ಲಿ ಸಾಗಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಚುತ ನಾಯಕ್ ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಉಪಾಧ್ಯಕ್ಷ ಸತೀಶ್ ರಾವ್ ಪಿ, ನಿರ್ದೇಶಕಿ ಡಾ.ಸುಧಾ ಎಸ್.ರಾವ್, ಕಾರ್ಯನಿವಹಣಾಧಿಕಾರಿ ಲಕ್ಷ್ಮೀಪ್ರಸಾದ್ ಬೊಟ್ಯಾಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಉಪಸ್ಥಿತರಿದ್ದರು.






















