ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಈಗಾಗಲೇ ಅಗ್ನಿ ಸುರಕ್ಷತೆ ಮತ್ತು ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳನ್ನು ಪಡೆಯಲು ಹರಸಾಹಸ ಪಡುತ್ತಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೊಸ ತಲೆನೋವನ್ನು ತಂದಿಟ್ಟಿದೆ.
2026-27ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಶಾಲೆಗಳನ್ನು ನೋಂದಾಯಿಸಲು ಬಯಸುವವರು ಇನ್ನು ಮುಂದೆ ಕೇವಲ ಕಟ್ಟಡದ ಭದ್ರತೆ ನೋಡಿದರೆ ಸಾಲದು, ವಿದ್ಯಾರ್ಥಿಗಳ ಮಾನಸಿಕ ಮತ್ತು ಡಿಜಿಟಲ್ ಸುರಕ್ಷತೆಗೂ ಗ್ಯಾರಂಟಿ ಕೊಡಬೇಕಿದೆ.
ಹೌದು, ಇಲಾಖೆಯು ಹೊಸದಾಗಿ ಶಾಲೆ ಆರಂಭಿಸಲು ಅರ್ಜಿ ಆಹ್ವಾನಿಸಿದ್ದು, ಶಾಶ್ವತ ಮಾನ್ಯತೆಗಾಗಿ ಅರ್ಜಿ ಸಲ್ಲಿಸುವಾಗ ಮೂರು ಹೊಸ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಲಗತ್ತಿಸುವಂತೆ ಸೂಚಿಸಿದೆ. ಅವುಗಳೆಂದರೆ:
1.ಸಾಮಾಜಿಕ-ಭಾವನಾತ್ಮಕ-ವೈಯಕ್ತಿಕ ಸುರಕ್ಷತೆ
2.ಲೈಂಗಿಕ ಸುರಕ್ಷತೆ
3.ಸೈಬರ್ ಸುರಕ್ಷತೆ
ಇಲಾಖೆಯ ಈ ಹೊಸ ನಿಯಮಾವಳಿಗಳು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (KAMS) ಕೆಂಗಣ್ಣಿಗೆ ಗುರಿಯಾಗಿವೆ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಅವರು, “ಈಗಾಗಲೇ ಇರುವ ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯುವುದೇ ದೊಡ್ಡ ಸವಾಲಾಗಿದೆ. ಇಲಾಖೆಯು ಪದೇ ಪದೇ ನಿಯಮಗಳನ್ನು ಬದಲಾಯಿಸುತ್ತಾ ಗೊಂದಲ ಸೃಷ್ಟಿಸುತ್ತಿದೆ. ಇದರ ನಡುವೆ ಈಗ ಮತ್ತೆ ಮೂರು ಹೊಸ ಪ್ರಮಾಣಪತ್ರಗಳನ್ನು ಕೇಳುತ್ತಿದ್ದಾರೆ. ಆದರೆ, ಈ ಪ್ರಮಾಣಪತ್ರಗಳನ್ನು ನೀಡುವ ಪ್ರಾಧಿಕಾರ ಯಾವುದು? ಅಥವಾ ಮಾನದಂಡಗಳೇನು ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ,” ಎಂದು ಕಿಡಿಕಾರಿದ್ದಾರೆ.





















