ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು, ವಿಚಾರವಂತರಾಗುವ ಜೊತೆಗೆ ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕವಾಗುತ್ತದೆ ಎಂದು ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟಿನ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.
ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ ವತಿಯಿಂದ 1549 ವಿದ್ಯಾರ್ಥಿಗಳಿಗೆ ಒಂದು ಕೋಟಿ ಎಪ್ಪತ್ತನಾಲ್ಕು ಲಕ್ಷದ ತೊಂಭತ್ತೇಳು ಸಾವಿರದ ಐದುನೂರು (1,74,97,500) ರೂ. ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಾವು ಕಲಿತ ಸಂಸ್ಥೆ, ಗುರು-ಹಿರಿಯರು ಹಾಗೂ ಸಮಾಜಕ್ಕೆ ಕೃತಜ್ಞರಾಗಿ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ಸಾರ್ಥಕ ಜೀವನ ನಡೆಸಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಸಲಹೆ ನೀಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ, ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಅಶೋಕ ಕುಮಾರ್ ಮತ್ತು ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಉಪಸ್ಥಿತರಿದ್ದರು.
ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್. ಕಾಕತ್ಕರ್ ಸ್ವಾಗತಿಸಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ಸೌಮ್ಯ, ಬಿ.ಪಿ. ವಂದಿಸಿದರು. ರಸಾಯನಶಾಸ್ತ್ರ ಉಪನ್ಯಾಸಕಿ ಡಾ. ನೆಫಿಸೆತ್ ಕಾರ್ಯಕ್ರಮ ನಿರೂಪಿಸಿದರು.
ಮೆಡಿಕಲ್ ಕೋರ್ಸ್ ಮಾಡುತ್ತಿರುವ 200 ವಿದ್ಯಾರ್ಥಿಗಳು, ಎಂಜಿನಿಯರಿಂಗ್ ವಿಭಾಗದ 563 ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ವಿಭಾಗದ 273 ವಿದ್ಯಾರ್ಥಿಗಳು, ಐಟಿಐ ವಿಭಾಗದ 166 ವಿದ್ಯಾರ್ಥಿಗಳು, ಡಿಪ್ಲೊಮಾ ವಿಭಾಗದ 96 ವಿದ್ಯಾರ್ಥಿಗಳು ಸೇರಿದಂತೆ ಇತರೆ ಕಾನೂನು, ನರ್ಸಿಂಗ್, ಪಶು ವೈದ್ಯಕೀಯ, ಕೃಷಿ, ಫಿಸಿಯೋಥೆರಪಿ, ಬಿಇಡ್ ವಿಭಾಗದಿಂದ 236 ವಿದ್ಯಾರ್ಥಿಗಳನ್ನು ಒಳಗೊಂಡ ಸುಮಾರು 1,549 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಪಡೆದುಕೊಂಡರು. ವಿದ್ಯಾರ್ಥಿ ವೇತನವನ್ನು ಪ್ರತಿ ತಿಂಗಳು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ.























