ಪುತ್ತೂರು : ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಿ ಬೆಳೆಯಬೇಕು. ಇನ್ನೊಬ್ಬರ ಹಂಗಿನಲ್ಲಿ ಯಾವತ್ತೂ ಇರಬಾರದು. ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸುವ ಧೈರ್ಯ, ಸ್ಥೈರ್ಯ ಬೆಳೆಸಿಕೊಂಡು ಜೀವನದಲ್ಲಿ ಸಾರ್ಥಕ ಬದುಕನ್ನು ಸಾಗಿಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಪ್ರಥಮ ಪಿಯು ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳು ಛಲದಿಂದ ಬದುಕುವವರಾಗಬೇಕು. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದೆ. ಮಕ್ಕಳು ಯಾವುದೇ ಒತ್ತಡಗಳಿಗೆ ಒಳಗಾಗದಂತೆ ಪೋಷಕರು ನಿಗಾ ವಹಿಸಬೇಕು. ದೇಶ ಭಕ್ತಿ ಮತ್ತು ದೇಶಪ್ರೇಮವನ್ನು ಬೆಳೆಸುವುದರ ಮೂಲಕ ಭಾರತದ ಅಮೂಲ್ಯ ರತ್ನಗಳಾಗಿ ಮಕ್ಕಳು ಬೆಳೆಯುವಂತಾಗಬೇಕು ಎಂದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಹಾಗೂ ವಿದ್ಯಾಲಯದ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಶೈಕ್ಷಣಿಕ ವರ್ಷ ಪ್ರಥಮ ಕಿರು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಆದ್ಯಾ ಡಿ ಶಾಸ್ತ್ರಿ, ಅನನ್ಯ ಎ, ಕನಿಷ್ಕ ಶೆಟ್ಟಿ, ಕರ್ಣಾಶ್ರುತ್ ಪ್ರಭು, ಶಿಲ್ಪ ವಿಧಾತ್ರಿ, ಹಾಗೂ ಯಶ್ಮಿತಾ ಅವರನ್ನು ಗೌರವಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಪ್ರಾಸ್ತಾವಿಕ ಮಾತುಗಳ ಜೊತೆಗೆ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳ ಮಾಹಿತಿ ನೀಡಿದರು. ಭೌತಶಾಸ್ತ್ರ ಉಪನ್ಯಾಸಕ ಸುಬ್ರಮಣ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
























