ಪುತ್ತೂರು: ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಬೆಳೆಯಬೇಕು. ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವ ಸಾಧನವಾಗಿರದೆ, ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯಾಗಬೇಕು. ಶಾಲೆಯಲ್ಲಿ ಕಲಿಯುವ ಪಾಠಗಳ ಜೊತೆಗೆ ಸತ್ಯನಿಷ್ಠೆ, ಪ್ರಾಮಾಣಿಕತೆ, ಶಿಸ್ತು, ಸಮಯಪಾಲನೆ ಹಾಗೂ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನಡೆದ ರಕ್ಷಕ ಶಿಕ್ಷಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಗ, ಧ್ಯಾನ, ಶಿಸ್ತು, ರಾಷ್ಟçಪ್ರೇಮ ಹಾಗೂ ಹೆತ್ತವರಿಗೆ ಗೌರವ ನೀಡುವ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯೋಗ ಮತ್ತು ಧ್ಯಾನವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಹಾಗೂ ಏಕಾಗ್ರತೆಯನ್ನು ವೃದ್ಧಿಸುತ್ತದೆ. ಹೆತ್ತವರು ಮತ್ತು ಗುರುಗಳ ತ್ಯಾಗ, ಮಾರ್ಗದರ್ಶನ ಹಾಗೂ ಮೌಲ್ಯಗಳನ್ನು ಗೌರವಿಸುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಮಾರ್ಗದರ್ಶಕಿ ಸುಚಿತ್ರಾ ಪ್ರಭು ಮಾತನಾಡಿ, ವಿದ್ಯಾರ್ಥಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು. ನಿಗದಿಪಡಿಸಲಾದ ಮಾರ್ಗದರ್ಶಕರೊಂದಿಗೆ ನಿರಂತರ ಸಂವಾದ ನಡೆಸಬೇಕು. ಓದಿನ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಮಾನ ಮಹತ್ವ ನೀಡಬೇಕು ಎಂದು ತಿಳಿಸಿದರು.
ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್. ಅವರು ಶೈಕ್ಷಣಿಕ ವರ್ಷದ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ತಿಲಕ್ ಬಿ.ಸಿ., ಉಪಪ್ರಾಂಶುಪಾಲ ಪ್ರದೀಪ್ ಕೆ.ವೈ. ಹಾಗೂ ಸಂಸ್ಥೆಯ ಉಪನ್ಯಾಸಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸಿಂಧೂರ, ಶ್ರಿಯಾ ಎಂ. ಹಾಗೂ ಜಿ.ಎಸ್. ಶ್ರೀ ಧಾರ್ಯ ಪ್ರಾರ್ಥಿಸಿದರು. ರಸಾಯನಶಾಸ್ತ ಉಪನ್ಯಾಸಕಿ ಅಪರ್ಣಾ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು. ಗಣಿತ ಉಪನ್ಯಾಸಕಿ ಅನುಶ್ರೀ ಎಂ. ವಂದಿಸಿದರು.
























