ಪುತ್ತೂರು: ಪದವಿಪೂರ್ವ ಶಿಕ್ಷಣ ಹಂತದಲ್ಲಿ ಕೈಗೊಳ್ಳುವ ನಿರ್ಧಾರಗಳು ಜೀವನವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದು, ನೀಟ್, ಸಿಇಟಿ, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಮೊಬೈಲ್, ಟಿವಿ, ಕ್ರೀಡೆ ಹಾಗೂ ಮನೋರಂಜನೆಯಂತಹ ವ್ಯತ್ಯಯಗಳಿಂದ ದೂರವಿದ್ದು ಅಧ್ಯಯನದತ್ತ ಸಂಪೂರ್ಣ ಗಮನ ಹರಿಸಬೇಕು ಎಂದು ಅಂಬಿಕಾ ಪದವಿಪೂರ್ವ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅವಿನಾಶ್ ಕೊಡಂಕಿರಿ ಹೇಳಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ನೀಟ್ ಅಕಾಡೆಮಿಯಲ್ಲಿ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯಲ್ಲಿ 2026ರ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪದವಿಪೂರ್ವ ಹಂತದಲ್ಲಿ ಹಲವು ಗೊಂದಲಗಳನ್ನು ಎದುರಿಸುವುದು ಸಹಜ. ಆದರೆ ಶಿಕ್ಷಣದತ್ತ ಗುರಿ ಕೇಂದ್ರೀಕರಿಸಿ ಪೋಷಕರು ಹಾಗೂ ಉಪನ್ಯಾಸಕರ ಮಾರ್ಗದರ್ಶನದೊಂದಿಗೆ ಶ್ರಮಿಸಿದರೆ ಉತ್ತಮ ವೃತ್ತಿ ಹಾಗೂ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ಶಿಕ್ಷಣದ ಜೊತೆಗೆ ತಂತ್ರಜ್ಞಾನದ ಸದುಪಯೋಗದ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಅಂಬಿಕಾದ ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆ ನೀಡುವ ಶಕ್ತಿಗಳಾಗಿ ಬೆಳೆಯಬೇಕು ಎಂಬುದು ಸಂಸ್ಥೆಯ ಉದ್ದೇಶ ಎಂದರು. ಶಿಸ್ತು, ಸಂಯಮ ಮತ್ತು ಅಧ್ಯಯನಕ್ಕೆ ಪೂರಕ ವಾತಾವರಣ ಕಲ್ಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ರಕ್ಷಕ-ಶಿಕ್ಷಕ ಸಂಘದ ಸದಸ್ಯ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ. ದೀಪಕ್ ರೈ ಹಾಗೂ ಬೋಧಕ ವೃಂದ ಉಪಸ್ಥಿತರಿದ್ದರು.
ಅಂಬಿಕಾ ನೀಟ್ ಅಕಾಡೆಮಿಯ ಪ್ರಾಂಶುಪಾಲ ಕೆ. ಕಿಶೋರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ವಂದಿಸಿದರು.
























