ಉಜಿರೆ: ಸ್ಥಳೀಯ ಎಸ್ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ ‘ಎಸ್ಡಿಎಂ ಆರೋಹಂ’ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ ತಿಳಿಸಿದ್ದಾರೆ.
ಸೋಮವಾರ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 10ರಂದು ಬೆಳಗ್ಗೆ 10 ಗಂಟೆಗೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ಬೆಂಗಳೂರಿನ ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ಅವರು ‘ಎಸ್ಡಿಎಂ ಆರೋಹಂ’ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಶುಭಾಶಂಸನೆ ಮಾಡಲಿದ್ದು, ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸೆ. 11ರಂದು ಸಂಜೆ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ.
ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪ್ರತಿ ಪದವಿಪೂರ್ವ ಕಾಲೇಜಿನಿಂದ 62 ಮಂದಿ ಹಾಗೂ ಪ್ರತಿ ಪದವಿ ಕಾಲೇಜಿನಿಂದ 19 ಮಂದಿ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 23 ಸ್ಪರ್ಧೆಗಳು ನಡೆಯಲಿವೆ.
ಸ್ಪರ್ಧೆಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಎರಡು ದಿನಗಳ ಕಾಲ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುವುದು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಸೆ. 10ರಂದು ಸಂಜೆ 6 ಗಂಟೆಯಿಂದ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ಸಂಜೆ 7 ಗಂಟೆಯಿಂದ ಟೀಂ ಕಂಬೋಜಿ ಮ್ಯೂಸಿಕ್ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪಪ್ರಾಂಶುಪಾಲೆ ಪ್ರೊ. ನಂದಕುಮಾರಿ, ಆರೋಹಂ ಸಂಘಟಕ ಗಣೇಶ್ ನಾಯಕ್, ಡಾ. ಶ್ರೀಧರ ಭಟ್ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಹೆಗ್ಡೆ ಉಪಸ್ಥಿತರಿದ್ದು ಕಾರ್ಯಕ್ರಮದ ಕುರಿತು ಪೂರಕ ಮಾಹಿತಿ ನೀಡಿದರು.























