ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026ನೇ ಸಾಲಿನಲ್ಲಿ ಇದುವರೆಗೆ ಒಟ್ಟು 87 ಎಚ್1ಎನ್1 (ಇನ್ಫ್ಲುಯೆಂಜಾ-1) ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್1ಎನ್1 ಪ್ರಕರಣಗಳ ಪತ್ತೆ, ಸೋಂಕು ಹರಡುವಿಕೆ ತಡೆ ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದರು.
ಇನ್ಫ್ಲುಯೆಂಜಾ ವೈರಸ್ನಿಂದ ಹರಡುವ ಎಚ್1ಎನ್1 ಪ್ರಕರಣಗಳ ಸಂಖ್ಯೆ ಹೆಚ್ಚಾದರೂ, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಆರೋಗ್ಯ ಇಲಾಖೆಯಲ್ಲಿ ಅಗತ್ಯ ಮೂಲಸೌಕರ್ಯ ಮತ್ತು ಔಷಧೋಪಚಾರ ಲಭ್ಯವಿದೆ ಎಂದು ಅವರು ತಿಳಿಸಿದರು.
ಎಚ್1ಎನ್1 ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿಗದಿತ ಕಣ್ಗಾವಲು ಕೇಂದ್ರಗಳಾಗಿ ಗುರುತಿಸಲಾಗಿದೆ. ಇಲ್ಲಿ ಸೋಂಕಿತರು ಹಾಗೂ ಶಂಕಿತ ಪ್ರಕರಣಗಳ ಮೇಲೆ ನಿಗಾ ವಹಿಸಿ ಅಗತ್ಯ ಚಿಕಿತ್ಸಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಎಚ್ಒ ಮಾಹಿತಿ ನೀಡಿದರು.
ಸಾರ್ವಜನಿಕರು ಜ್ವರ, ಕೆಮ್ಮು, ಗಂಟಲು ನೋವು ಸೇರಿದಂತೆ ಫ್ಲೂ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.


































