ಜಮ್ಮುಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತೀವ್ರವಾಗಿ ಖಂಡಿಸಿದ್ದು, ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ದೇಶಗಳು ಒಂದಾಗಿ ಹೋರಾಡುವಂತೆ ಕರೆ ನೀಡಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದು ಅಮಾನವೀಯ ಕೃತ್ಯ. ಮುಗ್ಧ ಜನರನ್ನು ಕೊಂದಿರುವ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಭಯೋತ್ಪಾದನೆ, ಉಗ್ರರ ಕೃತ್ಯಗಳಿಗೆ ಯಾರೂ ಬೆಂಬಲ ನೀಡಬಾರದು. ಭಯೋತ್ಪಾದನೆ ಇಂದು ಜಾಗತಿಕ ಶಾಂತಿ ವ್ಯವಸ್ಥೆಗೆ ಅಡ್ಡಿಯಾಗಿದೆ. ಹೀಗಾಗಿ ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ದೇಶಗಳು ಒಂದಾಗಬೇಕು ಎಂದು ಕರೆ ನೀಡಿದೆ.
ಉಗ್ರರ ದಾಳಿ ಖಂಡಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್:
ಇನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿ ಒಂದು ಕೆಟ್ಟ ಘಟನೆ. ಇದನ್ನು ಅಮೆರಿಕ ತೀವ್ರವಾಗಿ ಖಂಡಿಸುತ್ತೆ ಎಂದು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವಾಗಲೂ ಉದ್ವಿಗ್ನತೆ ಇದ್ದು, ಅದು ಈ ಘಟನೆಯಿಂದ ಮತ್ತಷ್ಟು ಹೆಚ್ಚಾಗಿದೆ. ನಿಮಗೆ ತಿಳಿದಿರುವಂತೆ ನಾನು ಭಾರತಕ್ಕೂ ತುಂಬಾ ಹತ್ತಿರವಾಗಿದ್ದೇನೆ ಮತ್ತು ಪಾಕಿಸ್ತಾನಕ್ಕೂ ತುಂಬಾ ಹತ್ತಿರವಾಗಿದ್ದೇನೆ ಎಂದು ಹೇಳಿದ್ದಾರೆ.