ಬೆಂಗಳೂರು: ಇರಾನ್–ಇಸ್ರೇಲ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ಹಾಗೂ ಇತರ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಕನ್ನಡಿಗರು ಆತಂಕದಲ್ಲಿದ್ದಾರೆ. ಈ ಹಿನ್ನೆಲೆ, ಅನಿವಾಸಿ ಭಾರತೀಯರ ಸುರಕ್ಷತೆಯ ವಿಷಯದಲ್ಲಿ ಕೇಂದ್ರ ಸರ್ಕಾರ ತುರ್ತು ಮಧ್ಯಪ್ರವೇಶ ಮಾಡಬೇಕೆಂದು ಸಿಎಂ ಮನವಿ ಮಾಡಿದ್ದಾರೆ.
ಪತ್ರದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಭಾರತೀಯ ರಾಯಭಾರ ಕಚೇರಿಗಳ ಮೂಲಕ ನಿರಂತರ ನಿಗಾ ವಹಿಸಲು ಮತ್ತು ರಾಜತಾಂತ್ರಿಕ ಸಂಪರ್ಕಗಳನ್ನು ಬಲಪಡಿಸಲು ಸಿಎಂ ಒತ್ತಾಯಿಸಿದ್ದಾರೆ. ಪರಿಸ್ಥಿತಿ ಬಿಗಡಾಯಿಸಿದರೆ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಬೇಕೆಂದು ಕೋರಿದ್ದಾರೆ.ವಿದೇಶದಲ್ಲಿರುವ ಕನ್ನಡಿಗರನ್ನು ಸುಲಭವಾಗಿ ಪತ್ತೆಹಚ್ಚಲು ಮತ್ತು ಅವರಿಗೆ ತ್ವರಿತ ಸೂಚನೆಗಳನ್ನು ನೀಡಲು ಕೇಂದ್ರೀಕೃತ ಡಿಜಿಟಲ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.
ದುಬೈ ಸೇರಿದಂತೆ ಪಶ್ಚಿಮ ಏಷ್ಯಾದ ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ವಾಯುಯಾನ ನಿರ್ಬಂಧಗಳಿಂದ ಅನೇಕ ಕನ್ನಡಿಗರು ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಅವರ ನೆರವಿಗೆ ರಾಜ್ಯದ ತುರ್ತು ಕಾರ್ಯಾಚರಣೆ ಕೇಂದ್ರಗಳು 24 ಗಂಟೆ ಕಾರ್ಯನಿರ್ವಹಿಸುತ್ತಿವೆ.ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಪ್ರಕ್ರಿಯೆಯಲ್ಲಿ ಕರ್ನಾಟಕ ಸರ್ಕಾರವು ಕೇಂದ್ರದೊಂದಿಗೆ ಪೂರ್ಣ ಪ್ರಮಾಣದ ಸಹಕಾರ ನೀಡಲು ಸಿದ್ಧವಿದೆ ಎಂದು ಸಿಎಂ ತಿಳಿಸಿದ್ದಾರೆ. ವಿದೇಶದಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.





















