ಗಡ್ಚಿರೋಲಿ: ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಗಡ್ಚಿರೋಲಿ ಜಿಲ್ಲೆಯ ಸರ್ಕಾರಿ ಆಶ್ರಮ ಶಾಲೆಯ ವಸತಿ ನಿಲಯದಲ್ಲಿ ಹಾವು ಕಡಿತದಿಂದ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಾವು ಕಡಿತಕ್ಕೊಳಗಾದ ಇತರ ಮೂವರು ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಜಿಲ್ಲೆಯ ಧನೋರಾ ತಾಲೂಕಿನ ಜಲತಲೈ ಗ್ರಾಮದಲ್ಲಿರುವ ಆಶ್ರಮ ಶಾಲೆಯ ಹಾಸ್ಟೆಲ್ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಹಾಸ್ಟೆಲ್ನಲ್ಲಿ ನೆಲದ ಮೇಲೆ ಮಲಗಿದ್ದ ವೇಳೆ ಆರು ಬಾಲಕಿಯರಿಗೆ ವಿಷಕಾರಿ ಹಾವು ಕಡಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯರ ವಯಸ್ಸು 8, 12 ಮತ್ತು 14 ವರ್ಷ ಎಂದು ತಿಳಿದುಬಂದಿದೆ. ಹಾವು ಕಡಿತಕ್ಕೊಳಗಾದ 11ರಿಂದ 14 ವರ್ಷದೊಳಗಿನ ಇತರ ಮೂವರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಹಿನ್ನೆಲೆಯಲ್ಲಿ ಗಡ್ಚಿರೋಲಿ ಜಿಲ್ಲಾಡಳಿತ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಗಡ್ಚಿರೋಲಿ ಜಿಲ್ಲಾ ಉಸ್ತುವಾರಿ ಸಚಿವ ದೇವೇಂದ್ರ ಫಡ್ನವೀಸ್, ಹಾವು ಕಡಿತದಿಂದ ಮೂವರು ಬಾಲಕಿಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.























