ಜನಾಂಗೀಯ ಹಿಂಸಾಚಾರದಿಂದ ಜರ್ಝರಿತವಾಗಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ ಆದೇಶಿಸಲಾಗಿದೆ.
ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ತೀರ್ಮಾನಿಸಲು ಬಿಜೆಪಿ ಒಮ್ಮತಕ್ಕೆ ಬರಲು ವಿಫಲವಾಗಿದ್ದರಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ರಾಜ್ಯಪಾಲರಿಂದ ವರದಿಯನ್ನು ಸ್ವೀಕರಿಸಿದ ಬಳಿಕ ನನಗೆ ಬಂದ ವರದಿ ಮತ್ತು ಇತರ ಮಾಹಿತಿಯನ್ನು ಪರಿಗಣಿಸಿದ ಬಳಿಕ, ಮಣಿಪುರ ರಾಜ್ಯದ ಸರ್ಕಾರವನ್ನು ಭಾರತದ ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ ನಡೆಸಲಾಗದ ಪರಿಸ್ಥಿತಿ ಉದ್ಭವಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಚೇರಿ ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಧಾನಸಭೆಯನ್ನು ಸಹ ಅಮಾನತುಗೊಳಿಸಲಾಗಿದೆ.
“ಸಂವಿಧಾನದ 356 ನೇ ವಿಧಿ ಮತ್ತು ಆ ಪರವಾಗಿ ನನಗೆ ಅಧಿಕಾರ ನೀಡುವ ಇತರ ಎಲ್ಲಾ ಅಧಿಕಾರಗಳಿಂದ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ಮಣಿಪುರ ರಾಜ್ಯ ಸರ್ಕಾರದ ಎಲ್ಲಾ ಕಾರ್ಯಗಳನ್ನು ಮತ್ತು ಆ ರಾಜ್ಯದ ರಾಜ್ಯಪಾಲರು ವಹಿಸಿರುವ ಅಥವಾ ಚಲಾಯಿಸಬಹುದಾದ ಎಲ್ಲಾ ಅಧಿಕಾರಗಳನ್ನು ನಾನು ಭಾರತದ ಅಧ್ಯಕ್ಷನಾಗಿ ವಹಿಸಿಕೊಳ್ಳುತ್ತೇನೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಬಿಜೆಪಿ ಉಸ್ತುವಾರಿ ಸಂಬಿತ್ ಪಾತ್ರ ಇಂಫಾನ್ನಲ್ಲಿದ್ದು ಬಿಜೆಪಿ ಶಾಸಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಆದರೆ ಮಂಗಳವಾರ ಸತತವಾಗಿ ಸಭೆ ನಡೆದ ಬಳಿಕವೂ ಮುಖ್ಯಮಂತ್ರಿ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಆಗಿಲ್ಲ.
21 ತಿಂಗಳ ಬಳಿಕ ರಾಜೀನಾಮೆ
ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದ 21 ತಿಂಗಳ ಬಳಿಕ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಬಿರೇನ್ ಸಿಂಗ್ ಫೆಬ್ರವರಿ 9 ರಂದು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದರು. ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯಲ್ಲಿ ಈವರೆಗೂ 250ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು, ಸಾವಿರಾರು ಜನ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ರಾಜೀನಾಮೆ ಬಳಿಕ ಮಾತನಾಡಿದ್ದ ಅವರು, ಮಣಿಪುರ ಜನತೆಗೆ ಸೇವೆ ಸಲ್ಲಿಸಿರುವುದು ಗೌರವದ ವಿಚಾರವಾಗಿದೆ. ಮಣಿಪುರ ಹಿತಾಸಕ್ತಿ ಕಾಪಾಡಲು ಎಲ್ಲಾ ರೀತಿಯ ಸಹಕಾರ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದರು.