ನವದೆಹಲಿ: ಎರಡು ದಿನಗಳ ಭೇಟಿಗಾಗಿ ಕತಾರ್ ರಾಜ್ಯದ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಸೋಮವಾರ ರಾತ್ರಿ ದೆಹಲಿಗೆ ಬಂದು ಇಳಿದಿದ್ದಾರೆ.
ಸೋಮವಾರ ರಾತ್ರಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕತಾರ್ ರಾಜನನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ವಿಮಾನ ನಿಲ್ದಾಣಕ್ಕೆ ಬಂದು ಬರಮಾಡಿಕೊಂಡರು. ಈ ವೇಳೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ ಇಂದು ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಬಳಿಕ ಪ್ರಧಾನಿ ಮೋದಿ ಅವರ ಜೊತೆ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನದ ಕುರಿತು ಮಾತುಕತೆ ನಡೆಯುವ ನಿರೀಕ್ಷೆ ಇದ್ದು ಇದರ ಜೊತೆಗೆ ಉನ್ನತ ಮಟ್ಟದ ಸಭೆಗಳಲ್ಲಿ ಉಭಯ ರಾಷ್ಟ್ರಗಳ ನಡುವಿನ ಪ್ರಮುಖ ಒಪ್ಪಂದಗಳನ್ನು ಚರ್ಚಿಸುವ ನಿರೀಕ್ಷೆ ಕೂಡ ಇದೆ.
2015 ರಲ್ಲಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದ ರಾಜ, ಇದೀಗ ಮೋದಿ ಸರಕಾರದ ಅವಧಿಯಲ್ಲಿ ಭಾರತಕ್ಕೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ.