ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ದಿಢೀರ್ ಕೋರ್ ಕಮಿಟಿ ಸಭೆ ನಡೆಸಿದ ಬಿಜೆಪಿಯು ಸರಕಾರದ ವಿರುದ್ಧ “ಕರ್ನಾಟಕ ಉಳಿಸಿ, ಕಾಂಗ್ರೆಸ್ ತೊಲಗಿಸಿ’ ಹೋರಾಟ ರೂಪಿಸಲು ನಿರ್ಧರಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಅಶ್ವತ್ಥನಾರಾಯಣ, ಸಿ.ಟಿ ರವಿ, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಪಿ. ರಾಜೀವ್ ಭಾಗಿಯಾಗಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿ ಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ನಡೆದ ಅನೇಕ ವಿಷಯ ಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಹೋರಾಟ ರೂಪಿಸಿದ್ದೇವೆ ಎಂದು ಹೇಳಿದರು.ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆಯಾಗಿದೆ. ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮೇಲೆ ದಾಳಿ ನಡೆಸಿದ ಪ್ರಕರಣದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಕರ್ನಾಟಕ ಗೂಂಡಾ, ಮಾದಕ ವ್ಯಸನಿಗಳ ರಾಜ್ಯವಾಗುತ್ತಿದೆ. ಕಾಂಗ್ರೆಸ್ ಶಾಸಕರೇ ಇದಕ್ಕೆ ಪ್ರೇರಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಅಭ್ಯರ್ಥಿ ಆಯ್ಕೆ
4 ಸ್ಥಾನಗಳ ವಿಧಾನಪರಿಷತ್ ಚುನಾವಣೆ ಬಗ್ಗೆ ಚರ್ಚೆಯಾಗಿದೆ. ರಾಜ್ಯ ಪ್ರವಾಸ ಮಾಡಿ ವರದಿ ನೀಡಲಾಗಿದೆ. ಎನ್ಡಿಎ ಭಾಗವಾಗಿರುವುದರಿಂದ ಜೆಡಿಎಸ್ ಜೊತೆ ಚರ್ಚೆ ಮಾಡಿ. ಶೀಘ್ರದಲ್ಲೇ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ ಎಂದು ಸಿ.ಟಿ. ರವಿ ಹೇಳಿದರು.





















