ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಮಂಗಳವಾರ ನಡೆದು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗುರುವಂದನಾ ಸಮಿತಿಯ ಅಧ್ಯಕ್ಷ ಚಿದಾನಂದ ಬೈಲಾಡಿ ಸಾರ್ವಜನಿಕರು ಹಾಗೂ ಅಂಬಿಕಾ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಾನಾ ಬಗೆಯ ಜವಾಬ್ದಾರಿಗಳನ್ನು ಗುರುತಿಸಿ ಹಂಚಲಾಗಿದೆ. ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯಗಳನ್ನು ನೆರವೇರಿಸಿಕೊಟ್ಟಾಗ ಕಾರ್ಯಕ್ರಮದ ಆಯೋಜನೆ ಸುಲಲಿತವೆನಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಶೃಂಗೇರಿ ಪೀಠ ಸಮಸ್ತ ಹಿಂದೂ ಸಮಾಜಕ್ಕೆ ಜಗದ್ಗುರು ಪೀಠವಾಗಿದ್ದು, ಆದಿ ಶಂಕರಾಚಾರ್ಯರಿAದ ಸ್ಥಾಪಿಸಲ್ಪಟ್ಟ ಚತುರಾಮ್ನಾಯ ಪೀಠಗಳಲ್ಲಿ ಒಂದಾಗಿ ಕಂಗೊಳಿಸುತ್ತಿದೆ. ಶೃಂಗೇರಿ ಜಗದ್ಗುರುಗಳ ಆಶೀರ್ವಾದ ಪಡೆದ ಅವೆಷ್ಟೋ ಮಂದಿ ಬದುಕಿನಲ್ಲಿ ಉನ್ನತಿಯನ್ನು ಕಂಡಿದ್ದಾರೆ ಎಂದು ನುಡಿದರು.
ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಮುಗೆರೋಡಿ ಬಾಲಕೃಷ್ಣ ರೈ, ಗೌರವ ಸಲಹೆಗಾರ ಎನ್.ಕೆ.ಜಗನ್ನಿವಾಸ ರಾವ್, ಕಾರ್ಯಾಧ್ಯಕ್ಷ ಶಿವರಾಮ ಆಳ್ವ, ಪ್ರಧಾನ ಕಾರ್ಯದರ್ಶಿ ಆರ್.ಸಿ.ನಾರಾಯಣ, ಖಜಾಂಜಿ ಕಾವು ಹೇಮನಾಥ ಶೆಟ್ಟಿ, ಕಾರ್ಯದರ್ಶಿ ಸಾಜ ರಾಧಾಕೃಷ್ಣ ಆಳ್ವ, ಸಂಚಾಲಕ ಡಾ.ಸುರೇಶ್ ಪುತ್ತೂರಾಯ, ಸಂಘಟನಾ ಕಾರ್ಯದರ್ಶಿ ದಿನೇಶ್ ಜೈನ್, ತಾಲೂಕು ಧರ್ಮ ಶಿಕ್ಷಣ ಸಮಿತಿಯ ಅಧ್ಯಕ್ಷ ದಂಬೆಕಾನ ಸದಾಶಿವ ರೈ, ಮಹಿಳಾ ಪ್ರಮುಖರಾದ ಶಶಿಕಲಾ ಸಿ.ಎಸ್. ಮೊದಲಾದವರು ಅನಿಸಿಕೆ ವ್ಯಕ್ತಪಡಿಸಿದರು. ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಕಾರ್ಯಕ್ರಮ ನಿರ್ವಹಿಸಿದರು.























