ಬಂಟ್ವಾಳ : ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಮಾರ್ಚ್ 3ರಂದು ಸಾಮೂಹಿಕ ಧರಣಿ ನಡೆಸಲಾಗುವುದಾಗಿ ಹೋರಾಟ ಸಮಿತಿ ಪ್ರಕಟಿಸಿದೆ.ಮಾಜಿ ಸಚಿವ ಹಾಗೂ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಬಿ. ರಮಾನಾಥ ರೈ ಅವರು ಬಿ.ಸಿ.ರೋಡ್ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ಟೋಲ್ ಸಂಗ್ರಹ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೆ ತಂದಿರುವ ಹಲವು ನಿಯಮಗಳು ಪಾಲನೆಯಾಗುತ್ತಿಲ್ಲ ಎಂಬ ಆರೋಪವಿದೆ. ಆದ್ದರಿಂದ ಟೋಲ್ ವಸೂಲಿ ತಕ್ಷಣ ನಿಲ್ಲಿಸಿ, ಟೋಲ್ ಕೇಂದ್ರವನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು ಎಂಬುದು ಸಮಿತಿಯ ಒತ್ತಾಯವಾಗಿದೆ ಎಂದು ಅವರು ಹೇಳಿದರು.ಹೋರಾಟಗಾರ ಮುನೀರ್ ಕಾಟಿಪಳ್ಳ ಮಾತನಾಡಿ, ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಸಭೆ ನಡೆಸಿ ಹೂಡಿಕೆ ಹಾಗೂ ವಸೂಲಾತಿ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ಸುರತ್ಕಲ್ನ ಹೋರಾಟ ಮಾದರಿಯನ್ನು ಅನುಸರಿಸಿ ಮುಂದಿನ ಹಂತದಲ್ಲಿ ಇನ್ನಷ್ಟು ಸಂಘಟನೆಗಳನ್ನು ಒಗ್ಗೂಡಿಸಿ ತೀವ್ರ ಹೋರಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಬಿ. ಶೇಖರ್, ಮೋಹನ್ ಶೆಟ್ಟಿ, ಪಿಯೂಸ್ ಎಲ್ ರೊಡ್ರಿಗಸ್ ಹಾಗೂ ಕೋಶಾಧಿಕಾರಿ ಬೇಬಿ ಕುಂದರ್ ಉಪಸ್ಥಿತರಿದ್ದರು.






















