ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು. ಭಾರತೀಯ ವಾಯುಸೇನೆಯ ನಿವೃತ್ತ ಸರ್ಜಂಟ್ ಶ್ರೀ ಸುರೇಶ್ ಎ. ಯು. ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಸಲ್ಲಿಸಿ, ನಮ್ಮ ದೇಶ ಹೆಮ್ಮೆ ಪಡುವಂತೆ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದ್ದು, ವಿದ್ಯಾರ್ಥಿಗಳು ದೇಶಾಭಿಮಾನವನ್ನು ಬೆಳೆಸಿಕೊಂಡು ದೇಶಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಪ್ರಮಾಣವಚನ ಬೋಧಿಸಿದರು.
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಶ್ರೀ ಜಯಂತ್ ನಡುಬೈಲು ಮಾತನಾಡಿ, ಸ್ವಾತಂತ್ರ್ಯ ಪ್ರತಿಯೊಬ್ಬ ಮನುಷ್ಯನ ಹಕ್ಕಾಗಿದ್ದು, ಅದನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕು ಎಂದರು. ಭಾರತ ಸದಾ ಸ್ವತಂತ್ರ ಹಾಗೂ ಶಕ್ತಿಶಾಲಿ ರಾಷ್ಟ್ರವಾಗಿರಬೇಕಾದರೆ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀ ಸಂಪತ್ ಕೆ. ಪಕ್ಕಳ ಮಾತನಾಡಿ, ಸ್ವಾತಂತ್ರ್ಯ ಸುಲಭವಾಗಿ ದೊರೆತದ್ದಲ್ಲ. ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಅವರ ತ್ಯಾಗವನ್ನು ಸದಾ ಸ್ಮರಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಬಾಲಕೃಷ್ಣ ಮರೋಡಿ, ಆಡಳಿತ ಮಂಡಳಿ ಸದಸ್ಯ ಶ್ರೀ ನಾರಾಯಣ ಪಿ.ವಿ., ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ.ಎ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಅಭಿಲಾಷ್ ಕ್ಷತ್ರಿಯ, ಕಾಲೇಜಿನ ಎನ್ಎಸ್ಎಸ್ ಘಟಕಗಳ ಯೋಜನಾಧಿಕಾರಿಗಳಾದ ಶ್ರೀ ರಾಕೇಶ್ ಹಾಗೂ ಶ್ರೀ ಗರ್ವ, ಉಪಪ್ರಾಂಶುಪಾಲ ಶ್ರೀ ರಕ್ಷಣ್ ಟಿ.ಆರ್., ಐಕ್ಯೂಎಸಿ ನಿರ್ದೇಶಕಿ ಶ್ರೀಮತಿ ರಶ್ಮಿ, ಉಪನ್ಯಾಸಕ-ಉಪನ್ಯಾಸಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಳಿಕ ಎನ್ಎಸ್ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ವಂದೇ ಮಾತರಂ, ಧ್ವಜಗೀತೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮದಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಾಣವಾಯಿತು. ಕಾಲೇಜಿನ ವಿದ್ಯಾರ್ಥಿ ನಾಯಕ ಸೂರ್ಯ (ತೃತೀಯ ಬಿ.ಕಾಂ) ಸ್ವಾಗತಿಸಿದರು. ದೇವಿಕಾ (ತೃತೀಯ ಎಫ್.ಡಿ) ವಂದನಾರ್ಪಣೆ ನೆರವೇರಿಸಿದರು. ಗ್ರೀಷ್ಮ (ದ್ವಿತೀಯ ಬಿ.ಕಾಂ) ಕಾರ್ಯಕ್ರಮ ನಿರೂಪಿಸಿದರು.


































