ಪುತ್ತೂರು: ಮಂಗಳೂರು–ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸುವಂತೆ ಕೋರಿ ಪುತ್ತೂರು ತಾಲೂಕು ನಿವಾಸಿ ಧನುಷ್ ಅವರು ರೈಲ್ವೆ ಸಚಿವರು ಹಾಗೂ ಸಂಸತ್ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ.
ಪುತ್ತೂರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಾಣಿಜ್ಯ ಮತ್ತು ಶೈಕ್ಷಣಿಕ ಕೇಂದ್ರವಾಗಿದ್ದು, ಸುತ್ತಮುತ್ತಲಿನ ಗ್ರಾಮೀಣ ಹಾಗೂ ಮಲೆನಾಡು ಪ್ರದೇಶಗಳ ಸಾವಿರಾರು ಜನರು ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಕೆಲಸಗಳಿಗಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ವಂದೇ ಭಾರತ್ ರೈಲಿಗೆ ನಿಲುಗಡೆ ಕಲ್ಪಿಸಿದರೆ ಈ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ರೈಲು ಪುತ್ತೂರಿನಲ್ಲಿ ನಿಲುಗಡೆ ಹೊಂದಿಲ್ಲದ ಕಾರಣ, ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರಯಾಣಿಕರು ವಂದೇ ಭಾರತ್ ಸೇವೆ ಪಡೆಯಲು ಮಂಗಳೂರು ಅಥವಾ ಕಬಕ–ಪುತ್ತೂರು ನಿಲ್ದಾಣವನ್ನು ಅವಲಂಬಿಸಬೇಕಾಗಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚುವರಿ ಪ್ರಯಾಣದ ಅನಾನುಕೂಲ ಉಂಟಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಆದ್ದರಿಂದ ಪುತ್ತೂರು ರೈಲು ನಿಲ್ದಾಣದಲ್ಲಿ ಮಂಗಳೂರು–ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ಗೆ ತಾತ್ಕಾಲಿಕ ಅಥವಾ ಅಧಿಕೃತ ನಿಲುಗಡೆ ಕಲ್ಪಿಸುವಂತೆ ಧನುಷ್ ಮನವಿ ಮಾಡಿದ್ದಾರೆ. ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ರೈಲ್ವೆ ಸಚಿವರು ಹಾಗೂ ಸಂಸತ್ ಸದಸ್ಯರನ್ನು ಒತ್ತಾಯಿಸಿದ್ದಾರೆ.

































