ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಡರಾತ್ರಿ ಹಠಾತ್ ಬೆಂಕಿ ಕಾಣಿಸಿಕೊಂಡ ಘಟನೆ ಬಿಳಿನೆಲೆ ಗ್ರಾಮದ ಎರ್ಮಾಯಿಲ್ನಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ತಪ್ಪಿದ್ದು, ಬಸ್ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಶನಿವಾರ (ಸೆ.5) ತಡರಾತ್ರಿ ಬಸ್ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ ರಸ್ತೆಯ ಎರ್ಮಾಯಿಲ್ ತಲುಪಿದ ವೇಳೆ ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಬಸ್ನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚನೆ ನೀಡಿದ್ದಾರೆ.
ಪ್ರಯಾಣಿಕರು ಬಸ್ನಿಂದ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರಗೊಂಡಿದ್ದು, ನೋಡನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಬಸ್ ಸಿಬ್ಬಂದಿ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.






















