ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡ ಧ್ವಜಾರೋಹಣದೊಂದಿಗೆ ನೆರವೇರಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ಮಾತನಾಡಿ ಕನ್ನಡ ನಾಡು ನುಡಿಯು ಅತ್ಯಂತ ಸಂಪತ್ಭರಿತವಾಗಿದ್ದು ಎಂಟು ಜ್ಞಾನಪೀಠ ಪ್ರಶಸ್ತಿಗಳು ಕನ್ನಡದ ಕವಿ, ಸಾಹಿತಿಗಳಿಗೆ ಲಭಿಸಿರುವುದು ಅತ್ಯಂತ ಅಭಿಮಾನದ ಸಂಗತಿ ಎಂದು ತಿಳಿಸಿದರು. ಭಾಷೆಯ ಬೆಳವಣಿಗೆ ಆಗಬೇಕಾದರೆ ಆ ಬಗ್ಗೆ ಪ್ರೀತಿ ಇರಬೇಕು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡಿಗರಲ್ಲಿ ಅಂತಹ ಪ್ರೀತಿ ಮೂಡಿ ಬರಲಿ ಎಂದು ತಿಳಿಸಿದರು.
ಕನ್ನಡ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆಯನ್ನು ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪೋಷಕರು ನೆರವೇರಿಸಿದರು.
ಕನ್ನಡ ಶಿಕ್ಷಕರಾದ ಮಂಜುನಾಥ್ ಶೇಟ್ ಕರ್ನಾಟಕದ ಏಕೀಕರಣದ ಚಳವಳಿಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಾದ ದನಿಶ್ ಮತ್ತು ರಶ್ಮಿತ್ ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಸಂಗೀತಾ ರಾವ್ ಸ್ವಾಗತಿಸಿದರು. ಕನ್ನಡ ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಅಮಿತಾ ವಂದಿಸಿದರು.































